ಬಿಜೆಪಿ ಅಭ್ಯರ್ಥಿಯ ದೂರು ರದ್ದು..!

ಬಿಜೆಪಿ ಅಭ್ಯರ್ಥಿಯ ದೂರು ರದ್ದು..!

ಬೆಂಗಳೂರು ಜು.22 : 2018ರ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಹಣ ಆಮಿಷವೊಡ್ಡಲು ಮುಂದಾದ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ, ಹಾಲಿ ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.

ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಏಕಸದಸ್ಯಪೀಠ ಈ ಆದೇಶ ಮಾಡಿದೆ. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ “ಕಾನೂನು ಪ್ರಕಾರ ಚುನಾವಣಾ ನೀತಿ ಸಂಹಿತೆ ಆರೋಪ ಸಂಬಂಧ ಚುನಾವಣಾಧಿಕಾರಿಗಳು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಬೇಕಾಗುತ್ತದೆ.

ದೂರಿನ ಅಂಶಗಳು ಮೇಲ್ನೋಟಕ್ಕೆ ಸತ್ಯ ಎಂದು ಕಂಡುಬಂದರೆ ತನಿಖೆ ನಡೆಸಲು ಪೊಲೀಸರಿಗೆ ಕೋರ್ಟ್ ನಿರ್ದೇಶಿಸಬಹುದು. ಆದರೆ, ಈ ಪ್ರಕರಣದಲ್ಲಿ ಚುನಾವಣಾಧಿಕಾರಿ ನೇರವಾಗಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹಾಗಾಗಿ, ದೂರು ದಾಖಲೆಯಲ್ಲಿ ಕಾನೂನು ಲೋಪವಾಗಿದ್ದು, ಅದಕ್ಕೆ ಮಾನ್ಯತೆ ಇಲ್ಲ” ಎಂದು ಹೇಳಿದೆ. ತುಳಸಿ ಮುನಿರಾಜುಗೌಡ ವಿರುದ್ದದ ದೂರು ಮತ್ತು ಆ ಕುರಿತ 24ನೇ ಎಸಿಎಂಎಂ ಕೋರ್ಟ್ ವಿಚಾರಣೆ ರದ್ದುಪಡಿಸಿ ಆದೇಶಿಸಿತು.

Related