ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು (ಅ.24 ಮಂಗಳವಾರ) ಕೊನೆಯ ದಿನವಾಗಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಸಮಸ್ತ ಜನತೆಗೆ ವಿಜಯದಶಮಿಯ ಶುಭಾಶಯಗಳು ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ವಿಜಯದಶಮಿ ಮತ್ತು ದಸರಾ ಮಹೋತ್ಸವದ ಶುಭಾಶಯ ಕೋರಿದ್ದಾರೆ. ನಗರದಲ್ಲಿ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮಗಳ ವಿವರ ನೀಡಿದರು.
ಮಧ್ಯಾಹ್ನ 1.45 ಗಂಟೆಗೆ ಅರಮನೆ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ಆನೆ ಮತ್ತು ಕುದುರೆ ಮತ್ತು ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯುತ್ತದೆ. ಜಂಬೂ ಸವಾರಿ ಶುರುವಾಗುವ ಮೊದಲು ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ಜಂಬೂ ಸವಾರಿ ಸಾಯಂಕಾಲ 8.00 ಗಂಟೆಗೆ ಬನ್ನಿಮಂಟಪ ತಲುಪಿದ ಬಳಿಕ ಟಾರ್ಚ್ ಲೈಟ್ ಪರೇಡ್ ನಡೆಯುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.