ಬೆಂಗಳೂರು ಜುಲೈ 22 : “ಗಾಂಧಿ ಕುಟುಂಬವು ಸುಮಾರು ಏಳು ದಶಕ ಭಾರತವನ್ನು ಆಳಿದೆ. 3-4 ತಲೆಮಾರುಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ” ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನು ವಿರೋಧಿಸಿ ಗುರುವಾರ ಬೆಂಗಳೂರಿನಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರಮೇಶ್ ಕುಮಾರ್ ಮಾತನಾಡಿದರು.
“ಕಾಂಗ್ರೆಸ್ ಸುಮಾರು 70 ವರ್ಷ ದೇಶ ಆಳಿದೆ. ಕಾಂಗ್ರೆಸ್ನವರೇ ಆದ ನಾವೆಲ್ಲರೂ ಮುಂದಿನ ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ, ಹಣ ಗಳಿಸಿದ್ದೇವೆ. ಅಧಿಕಾರ ಅನುಭವಿಸಿದ್ದೇವೆ. ಇದೀಗ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪ ಮೇಲೆ ವಿಚಾರಣೆ ನಡೆಯುತ್ತಿದೆ. ದೇಶ ಉಳಿಯಲು, ಕಾಂಗ್ರೆಸ್ ಉಳಿಸಲು ನಾವೆಲ್ಲರೂ ಒಟ್ಟಾಗಿ ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.