ಬಂದ್‌ ಗೆ ಸಂಪೂರ್ಣ ಬೆಂಬಲ; ಬೊಮ್ಮಾಯಿ

ಬಂದ್‌ ಗೆ ಸಂಪೂರ್ಣ ಬೆಂಬಲ; ಬೊಮ್ಮಾಯಿ

ಹುಬ್ಬಳ್ಳಿ,ಸೆ.29: ಕಾವೇರಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ವಿಪಕ್ಷದಿಂದ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ ಕಾವೇರಿಗಾಗಿ ಎಲ್ಲಿವರೆಗೂ ಹೋರಾಟ ಇರುತ್ತದೆಯೋ ಅಲ್ಲಿವರೆಗೂ ನಮ್ಮ ಹೋರಾಟ, ಬೆಂಬಲ ಇದ್ದೇ ಇರುತ್ತದೆ.
ಕಾವೇರಿ ನೀರಿನ ವಿಷಯವಾಗಿ ಇವತ್ತು ಸಹ ಮುಖ್ಯಮಂತ್ರಿಗಳ ಹೇಳಿಕೆ ನೋಡಿದ್ದೇನೆ. ಈಗ 3 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾದ ವಾದ ಮಂಡನೆ ಮಾಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ.

ಕಾವೇರಿ ವಿಷಯದಲ್ಲಿ ಸರ್ಕಾರ ಎಡವಿದೆ. ನಾವು ಹೋರಾಟ ಮಾಡುತ್ತೇವೆ. ಕರ್ನಾಟಕ ಬಂದ್‌ಗೆ ನಮ್ಮದು ಸಂಪೂರ್ಣ ಬೆಂಬಲವಿದೆ. ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಾವು ಹೋರಾಟದಲ್ಲಿರುತ್ತೇವೆ ಎಂದರು.

ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಬರಗಾಲ ಆವರಿಸಿದೆ. ಈಗಾಗಲೇ ಮುಂಗಾರು ಮುಗಿದಿದೆ. ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಆದರೆ ಬೆಳೆ ಪರಿಹಾರಕ್ಕೆ ಮಾತ್ರ ಸರ್ಕಾರ ಮುಂದಾಗಿಲ್ಲ. ಹಿಂದೆ ಪ್ರವಾಹ ಬಂದಾಗ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿದ್ದೇವೆ. ಈ ಸರ್ಕಾರ ಏನು ಮಾಡುತ್ತಿದೆ? ಬಹುತೇಕ ಸಂದರ್ಭದಲ್ಲಿ ರಾಜ್ಯದ ರೈತರಿಗೆ ನಾವು ಪರಿಹಾರ ಒದಗಿಸಿದ್ದೇವೆ. ನಮ್ಮ ಸರ್ಕಾರದಂತೆ ಈ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಟೀಕಿಸಿದರು.

Related