ಉಪಚುನಾವಣೆಗೆ ಜೆಡಿಎಸ್ ಎಂಟ್ರಿ..!

ಉಪಚುನಾವಣೆಗೆ ಜೆಡಿಎಸ್ ಎಂಟ್ರಿ..!

ಬೆಂಗಳೂರು : ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸಯ್ಯದ್ ಯಸರಬ್ ಆಲಿಖಾದರಿ ಅವರ ಪರವಾಗಿ ಜೆಡಿಎಸ್ ನಾಯಕರು ಸೋಮವಾರದಿಂದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಬಸವಕಲ್ಯಾಣ ಒಂದೇ ಕ್ಷೇತ್ರದಲ್ಲಿ ಮಾತ್ರ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಶತಾಯಗತಾಯ ಹೋರಾಟ ನಡೆಸಿ ಗೆಲುವು ಸಾಸಬೇಕು ಎಂಬ ಅಪೇಕ್ಷೆಯನ್ನು ಪಕ್ಷದ ವರಿಷ್ಠರು ಹೊಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೋಮ್ ಕ್ವಾರಂಟೈನ್‌ನಲ್ಲಿ ಇರುವುದರಿಂದ ಚುನಾವಣಾ ಪ್ರಚಾರ ಕೈಗೊಳ್ಳುವುದು ಒಂದೆರಡು ದಿನ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ವೇಳೆ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶ್ಯಂಪೂರ್, ವಿಧಾನಸಭಾ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ನಾಯಕರ ದಂಡೇ ಬಸವಕಲ್ಯಾಣ ಉಪಚುನಾವಣೆಯಲ್ಲಿ ಪ್ರಚಾರಕ್ಕಿಳಿಯಲಿದೆ.

ಇದಕ್ಕಾಗಿ ಬೇಕಾದ ಎಲ್ಲಾ ಶ್ರಮವನ್ನು ವಹಿಸಲು ಮುಂದಾಗಿದ್ದಾರೆ. ಚುನಾವಣಾ ಪ್ರಚಾರ ಮುಗಿಯುವವರೆಗೂ ಕ್ಷೇತ್ರದಲ್ಲಿ ಬೀಡು ಬಿಟ್ಟು ಗೆಲುವಿಗಾಗಿ ನಾನಾ ರೀತಿಯ ಕಾರ್ಯತಂತ್ರಗಳು ರೂಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

Related