ಕುಲಕರ್ಣಿ ಜಾಮೀನು ಅರ್ಜಿ ಮುಂದೂಡಿಕೆ

ಕುಲಕರ್ಣಿ ಜಾಮೀನು ಅರ್ಜಿ ಮುಂದೂಡಿಕೆ

ಧಾರವಾಡ : ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿ. 4ಕ್ಕೆ ಮುಂದೂಡಿದೆ. ಈ ಮೂಲಕ ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿಯಾಗಿದೆ.

ವಿನಯ್ ಕುಲಕರ್ಣಿ ಪರ ವಕೀಲರು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿ ವಕೀಲರು ವಾಪಸ್ ಪಡೆದಿದ್ದರು. ಇದೀಗ ಹೊಸ ಜಾಮೀನು ಅರ್ಜಿಯನ್ನು ವಿನಯ ಕುಲಕರ್ಣಿ ಪರವಕೀಲರು ಸಲ್ಲಿಸಿದ್ದಾರೆ. ಇಂದು ಅರ್ಜಿ ವಿಚಾರಣೆಯ ಅವಧಿ ಮುಗಿದ ಹಿನ್ನೆಲೆ ಡಿ. 4ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಡಿ.7ರವರೆಗೆ ವಿಸ್ತರಿಸಿದ್ದಾರೆ. ಇನ್ನೊಂದೆಡೆ ನ. 9ಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ವಿನಯ ಪರ ವಕೀಲರು, ಸಿಬಿಐ ತಕರಾರು ಅರ್ಜಿ ಸಲ್ಲಿಸೋ ಮೊದಲೇ ತಮ್ಮ ಅರ್ಜಿ ನ.19ರಂದು ವಾಪಸ್ ಪಡೆದಿದ್ದರು. ಬಳಿಕ ಮರು ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಮತ್ತೊಂದು ಕಡೆ ಯೋಗೇಶ್ ಗೌಡ ಹತ್ಯೆಯಾದಾಗ ತನಿಖಾಧಿಕಾರಿಯಾಗಿದ್ದ ಉಪನಗರ ಠಾಣೆಯ ಇನ್ಸ್ ಪೆಕ್ಟರ್ ಚನ್ನಕೇಶವ ಟಿಂಗರಿಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನವೆಂಬರ್ 30ಕ್ಕೆ ಮುಂದೂಡಿದೆ. ಟಿಂಗರಿಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಬಿಐ ಪರ ವಕೀಲರು ತಕರಾರು ಅರ್ಜಿ ಸಹ ಸಲ್ಲಿಸಿದ್ದಾರೆ.

Related