ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಇಂದಿನಿಂದ ಸಫಾರಿ ಆರಂಭವಾಗಿದೆ.
ಪಿಜಿ ಪಾಳ್ಯ ವನ್ಯಜೀವಿ ವಲಯದ ಸಫಾರಿಗೆ ಲೊಕ್ಕನಹಳ್ಳಿ ಬಳಿ ಇಂದು ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕರು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿ ಆರಂಭವಾಗಿರುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಅವಕಾಶವಾಗಲಿದೆ. ಕೊಳ್ಳೇಗಾಲ ಪಟ್ಟಣದಿಂದ ಸಫಾರಿ ಪ್ರದೇಶಕ್ಕೆ 24 ಕಿ.ಮೀ ದೂರವಿದೆ. ಮೈಸೂರಿನಿಂದ ಪಿಜಿ ಪಾಳ್ಯಕ್ಕೆ 90 ಕಿ.ಮೀ ಅಂತರ ವಿರುವುದರಿಂದ ಪ್ರವಾಸಿಗರು ಸಫಾರಿಗೆ ಬರಲು ಅನುಕೂಲವಾಗಲಿದೆ ಎಂದರು.
ಹನೂರು ಭಾಗದಲ್ಲಿ ಗುಂಡಾಲ್ ಜಲಾಶಯ, ಇನ್ನಿತರ ಪ್ರವಾಸಿ ತಾಣಗಳನ್ನು ಪ್ರವಾಸಿಗರು ವೀಕ್ಷಿಸಬಹುದಾಗಿದೆ. ಈ ಭಾಗದ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಹೀಗಾಗಿ ಸಫಾರಿ ಆರಂಭವಾಗಿರುವುದು ಉತ್ತಮ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು.