ಮಂಗಳೂರು: ಇಂದು ಮಂಗಳೂರಿನಲ್ಲಿ ಬಿಜೆಪಿ ಪಕ್ಷವು ಬೃಹತ್ ಸಮಾವೇಶವನ್ನು ಕೈಗೊಂಡಿದ್ದು ಈ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜನರ ನುದ್ದೇಶಿಸಿ ಮಾತನಾಡಿದರು.
ಇದು ಐತಿಹಾಸಿಕ ಭೂಮಿ. ಕೋಟಿ ಚೆನ್ನಯನವರಿಂದ, ವೀರ ಅಬ್ಬಕ್ಕ ದೇವಿ, ನಾರಾಯಣ ಗುರುಗಳ ಭೂಮಿ ಇದು. ಈ ಭೂಮಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಇತಿಹಾಸವಿದೆ.
ಆಸ್ಕರ್ ಫರ್ನಾಂಡೀಸ್ ಹಾಗೂ ಜನಾರ್ದನ ಪೂಜಾರಿ ಅವರು ಈ ರಾಜ್ಯದಲ್ಲಿ ಅನೇಕ ನಾಯಕರನ್ನು ಬೆಳೆಸಿ ಪಕ್ಷ ಬಲವರ್ಧನೆ ಮಾಡಿದ್ದಾರೆ. ನಾನು ವಿದ್ಯಾರ್ಥಿ ನಾಯಕನಾಗಿದ್ದ ಸಮಯದಲ್ಲಿ ಒಂದು ಬೈಕ್ ತೆಗೆದುಕೊಳ್ಳಬೇಕೆಂದರೆ ಮೂರ್ನಾಲ್ಕು ಜನರಿಂದ ಸಹಿ ಹಾಕಿಸಬೇಕಿತ್ತು. ಈ ಸಂದರ್ಭದಲ್ಲಿ ಪೂಜಾರಿ ಅವರು ಸಾಲ ಮೇಳದ ಕಾರ್ಯಕ್ರಮ ಮಾಡುತ್ತಿದ್ದರು. ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ ಪರಿಣಾಮ ಇಂದು ಬ್ಯಾಂಕುಗಳು ನಿಮ್ಮ ಮನೆ ಬಾಗಿಲಿಗೆ ಬಂದು ಸಾಲ ನೀಡುವಂತಾಗಿದೆ.
ಇಂದಿರಾ ಗಾಂಧಿ ಅವರ ಕಾರ್ಯಕ್ರಮ ಗಮನದಲ್ಲಿಟ್ಟುಕೊಂಡು ಪೂಜಾರಿ ಅವರು ಈ ಸಾಲ ಮೇಳ ಕಾರ್ಯಕ್ರಮ ಮಾಡುತ್ತಿದ್ದರು. ನಾನು 1985ರ ಚುನಾವಣೆಯಲ್ಲಿ ಸೋತಿದ್ದಾಗ ನಾನು ಪೂಜಾರಿ ಅವರನ್ನು ಕರೆದುಕೊಂಡು ಹೋಗಿ ಕನಕಪುರದಲ್ಲಿ ಸಾಲ ಮೇಳ ಕಾರ್ಯಕ್ರಮ ಮಾಡಿದೆ. ಅದರ ಪರಿಣಾಮವಾಗಿ ಜಿಲ್ಲಾ ಪಂಚಾಯ್ತಿ ಸದಸ್ಯನಾದೆ. ನಂತರ ಶಾಸಕನಾಗಿ ನಂತರ ಇಲ್ಲಿಯವರೆಗೂ ನಿರಂತರವಾಗಿ ಶಾಸಕನಾಗಿದ್ದೇನೆ.
ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಕಾರ್ಯಕ್ರಮ ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ಈ ಭಾಗದ ಜನ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಇದೇ ಭೂಮಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದರು. ನಮ್ಮ ಸರ್ಕಾರ ಬಂದ ನಂತರ ಜಾರಿಗೆ ಬಂದ ಮೊದಲ ಗ್ಯಾರಂಟಿ ಯೋಜನೆ ಇದಾಗಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.
ಈ ಯೋಜನೆ ಜಾರಿಯಾದ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಸರ್ಕಾರಕ್ಕೆ ಪತ್ರ ಬರೆದು ನಿಮ್ಮ ಯೋಜನೆಯಿಂದ ಈ ಭಾಗದ ಪುಣ್ಯಕ್ಷೇತ್ರಗಳಿಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದೆ. ದೇವಾಲಯಗಳಲ್ಲಿ ಮುಖ್ಯಮಂತ್ರಿಗಳ ಹೆಸರಲ್ಲಿ ಪೂಜೆ ಮಾಡಿಸಲಾಗುತ್ತಿದೆ ಎಂದು ಹೇಳಿದರು.
ನಾನು ಚುನಾವಣೆ ಸಮಯದಲ್ಲಿ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ಅಧಿಕಾರ ಕೊಟ್ಟ ನಂತರ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನಿಮಗೆ ಶಕ್ತಿ ನೀಡಿದ್ದೇವೆ ಎಂದರು.