ಬೀದರ : ಕಲಬುರ್ಗಿ ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚಿಂಚೋಳಿ ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ತನಿಖೆ ನಡೆಸಬೇಕು, ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸಂಸದರ ನಿಧಿಯಿಂದ 10 ಲಕ್ಷ ಪರಿಹಾರ ಕೊಡಬೇಕು ಎಂದು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘ ಆಗ್ರಹಿಸಿದೆ.
ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದಾರ್ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಸಂಸದ ಭಗವಂತ ಖೂಬಾ ಅವರನ್ನು ಭೇಟಿಯಾಗಿ ಅವರಿಗೆ ಮನವಿಪತ್ರ ಸಲ್ಲಿಸಿದರು.
ಬಡ ಕುಟುಂಬ ಬಾಲಕಿಯ ಮೇಲೆ ಅಮಾನವೀಯ ಕೃತ್ಯ ಎಸಗಲಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡಿದರು.
ಬಾಲಕಿಯ ಕುಟುಂಬಕ್ಕೆ 3 ಎಕರೆ ಜಮೀನು ಮಂಜೂರು ಮಾಡಲು ಸಂಬಂಧ ಪಟ್ಟವರಿಗೆ ಸರ್ಕಾರ ಶಿಫಾರಸು ಮಾಡಬೇಕು ಎಂದು ಪ್ರತಿಭಟನಕಾರರು ಮನವಿಯಲ್ಲಿ ಸಂಸದ ಭಗವಂತ ಖೂಬಾರನ್ನು ಒತ್ತಾಯಿಸಿದ್ದಾರೆ.