ಸಾರಿಗೆ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಎಎಪಿ ಮುತ್ತಿಗೆ

ಸಾರಿಗೆ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಎಎಪಿ ಮುತ್ತಿಗೆ

ಬೆಂಗಳೂರು: ಸಾರಿಗೆ ನೌಕರರ ಸಾಲುಸಾಲು ಆತ್ಮಹತ್ಯೆಗೆ ಸಂಬಂಧಿಸಿ ಸಚಿವ ಶ್ರೀರಾಮುಲು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು. ಪ್ರತಿಭಟನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಪೃಥ್ವಿ ರೆಡ್ಡಿ, ಅಸಮರ್ಥ ಸಾರಿಗೆ ಸಚಿವ ಶ್ರೀರಾಮುಲುರವನ್ನು ಸಚಿವ ಸಂಪುಟದಿಂದ ಕೈಬಿಟ್ಟು ಯೋಗ್ಯರಿಗೆ ಸಾರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ಬಿಜೆಪಿ ಸರ್ಕಾರದ ಅವಧಿಯಲ್ಲಿ 35ಕ್ಕೂ ಹೆಚ್ಚು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಕೇವಲ 15 ದಿನಗಳಲ್ಲಿ ಆರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗೆ ಸಾಲುಸಾಲು ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಚಿವರು ಹಾಗೂ ಅಧಿಕಾರಿಗಳು ಮೃತ ನೌಕರರ ಶವ ನೋಡಲು ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಕೂಡ ತೆರಳದಿರುವುದು ನಿಜಕ್ಕೂ ಅಮಾನವೀಯ. ಆತ್ಮಹತ್ಯೆಗಳನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಪ್ರತಿಭಟನೆ ಮಾಡಿದ ನಂತರ ಸರ್ಕಾರವು ಡಿಪೋ ಮ್ಯಾನೇಜರ್‌ರೊಬ್ಬರನ್ನು ಅಮಾನತು ಮಾಡಿ ಸುಮ್ಮನಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಿಸಲು ಕೂಡ ಸಾರಿಗೆ ಸಚಿವರಿಗೆ ಸಾಧ್ಯವಾಗದಿರುವುದು ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಸೇವೆಯಲ್ಲಿ ಸಾರಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. ಅವರಿಂದಾಗಿಯೇ ಇಂದು ಜನಸಾಮಾನ್ಯರಿಗೆ ಪ್ರಯಾಣ ಸಾಧ್ಯವಾಗುತ್ತಿದೆ. ಆದರೆ ಸರ್ಕಾರವು ಅವರನ್ನು ಶತ್ರುಗಳಂತೆ ನೋಡುತ್ತಿದೆ. ಸಾರಿಗೆ ನೌಕರರಿಗೆ ಅನ್ಯಾಯವಾಗುತ್ತಿರುವುದು ನೋಡಿಕೊಂಡು ಆಮ್‌ ಆದ್ಮಿ ಪಾರ್ಟಿಯು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಸರ್ಕಾರವು ಶೀಘ್ರವೇ ಶ್ರೀರಾಮುಲುರವನ್ನು ಸಂಪುಟದಿಂದ ವಜಾ ಮಾಡಿ, ಸಂತ್ರಸ್ತ ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ನೀಡಿ, ಸಾರಿಗೆ ನೌಕರರ ಹಿತ ಕಾಪಾಡುವಂತಹ ಸಾರಿಗೆ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಬೇಕು” ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರರ ಪೈಕಿ ಅನೇಕರು ಡೆತ್‌ ನೋಟ್‌ ಬರೆದಿಟ್ಟಿದ್ದಾರೆ. ಸಾವಿಗೆ ಇಲಾಖೆಯಲ್ಲಿನ ಕಿರುಕುಳವೇ ಕಾರಣವೆಂದು ಅದರಲ್ಲಿ ಸ್ಪಷ್ಟವಾಗಿ ಆರೋಪಿಸಿದ್ದಾರೆ. ಸಚಿವರು ಹಾಗೂ ಉನ್ನತ ಅಧಿಕಾರಿಗಳ ಅಕ್ರಮಗಳಿಂದಾಗಿ ಪ್ರಾಮಾಣಿಕ ನೌಕರರು ಮಾನಸಿಕ ಕಿರುಕುಳ ಅನುಭವಿಸುವಂತಾಗಿದೆ. 2020 ಹಾಗೂ 2021ರಲ್ಲಿ ಕೋವಿಡ್‌ನಿಂದಾಗಿ 110ಕ್ಕೂ ಹೆಚ್ಚು ಸಾರಿಗೆ ನೌಕರರು ಬಲಿಯಾಗಿದ್ದಾರೆ. ಇವರ ಕುಟುಂಬಗಳಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತಾದರೂ ಈವರೆಗೆ ಕೇವಲ ಏಳು ಕುಟುಂಬಗಳಿಗೆ ಮಾತ್ರ ಪರಿಹಾರ ದೊರೆತಿದೆ. ಸಾರಿಗೆ ಸಚಿವ ಶ್ರೀರಾಮುಲುರವರು ಕೋವಿಡ್‌ ಪರಿಹಾರ ದೊರಕಿಸಿಕೊಡುವುದರಲ್ಲೂ ವಿಫಲರಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ” ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ಎಎಪಿ ಮುಖಂಡರಾದ ವಿಜಯ್‌ ಶರ್ಮ, ಸಂಚಿತ್‌ ಸವ್ಹಾನಿ, ಬಿ.ಟಿ.ನಾಗಣ್ಣ, ಜಗದೀಶ್‌ ವಿ ಸದಂ, ದರ್ಶನ್‌ ಜೈನ್‌, ಸುರೇಶ್‌ ರಾಥೋಡ್‌, ಜಗದೀಶ್‌ ಚಂದ್ರ, ಚನ್ನಪ್ಪ ಗೌಡ ನೆಲ್ಲೂರು, ಕುಶಲಸ್ವಾಮಿ, ಉಷಾ ಮೋಹನ್‌ ಮತ್ತಿತರ ಮುಖಂಡರು, ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related