ಹಾವೇರಿ : ಬರುವ ನಾಲ್ಕು ತಿಂಗಳೊಳಗಾಗಿ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಗುರಿ ಸಾಧಿಸಬೇಕು. ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಗಳಿಗೆ ಮಂಜೂರಾದ ಅನುದಾನ ಲ್ಯಾಫ್ಸ್ ಆದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರು ಸೂಚಿಸಿದ್ದಾರೆ.
ಯೋಜನೆಗಳ ಅನುಷ್ಠಾನಕ್ಕೆ ಮಾರ್ಚವರೆಗೆ ಕಾಯದೇ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು. ಸರಕಾರದ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆ ಅನುದಾನದ ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳ ಆದಾಯದಲ್ಲಿ ಶೇ.29 ರಷ್ಟು ಎಸ್.ಸಿ/ಎಸ್.ಟಿ. ಯೋಜನೆಗಳಿಗೆ ಖರ್ಚು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ತುಂಗಾ ಮೇಲ್ದಂಡೆ ಯೋಜನೆ, ರೇಷ್ಮೆ, ಮೀನುಗಾರಿಕೆ, ಅರಣ್ಯ, ಸಣ್ಣ ನೀರಾವರಿ ಇಲಾಖೆ ಹಾಗೂ ಅಂಬೇಡ್ಕರ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಯೋಜನೆಗಳಿಗೆ ನಿಗದಿ ಪಡಿಸಿದ ಗುರಿ ಸಾಧಿಸಲು ಸೂಚನೆ ನೀಡಿದರು.
ಜಿಪಂ ಸಿ.ಇ.ಒ ರಮೇಶ ದೇಸಾಯಿ ಮಾತನಾಡಿ, ಜಿಲ್ಲೆಯ ಜಾನುವಾರುಗಳಲ್ಲಿ ಲಂಪ್ಸ್ಕೀನ್ ರೋಗ ಕಾಣಿಸಿಕೊಂಡಿದ್ದು, ಇಂತಹ ಜಾನುವಾರುಗಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು. ಜಾನುವಾರು ಚಿಕಿತ್ಸಾ ಶಿಬಿರ ಆಯೋಜಿಸುವಂತೆ ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.