ಕೈ ಗೆ ಮುನ್ನಡೆ, ಸಿಎಂ ಪಟ್ಟ ಯಾರಿಗೆ!?

ಕೈ ಗೆ ಮುನ್ನಡೆ, ಸಿಎಂ ಪಟ್ಟ ಯಾರಿಗೆ!?

ಬೆಂಗಳೂರು: ಕರುನಾಡು ಮಹಾ ತೀರ್ಪಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದು ಕಾಂಗ್ರೆಸ್ ನಾಯಕರಲ್ಲಿ ಮಂದಹಾಸ ಮೂಡುತ್ತಿದೆ. ಇನ್ನು ಕಾಂಗ್ರೆಸ್ ನಾಯಕರಲ್ಲಿ ಸಿಎಂ ಪಟ್ಟ ಯಾರಿಗೆ ಎಂಬ ಚರ್ಚೆ ಪ್ರಾರಂಭವಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಯಾರಾಗುತ್ತಾರೆನ್ನುವ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ.

ಕಾಂಗ್ರೆಸ್​ ಪಕ್ಷದಲ್ಲಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಗೆದ್ದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಫರ್ಧಿಯಾಗಲಿದ್ದಾರೆ. ಅದರಂತೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕೂಡ ಸಿದ್ದರಾಮಯ್ಯ ಬದಲಿಗೆ ತಮ್ಮನ್ನೇ ಮುಖ್ಯಮಂತ್ರಿ ಮಾಡುವಂತೆ ಪಕ್ಷದ ಹೈ ಕಮಾಂಡ್​ ಮೇಲೆ ಒತ್ತಡ ಹೇರಿದ್ದಾರೆಂಬ ಮಾತುಗಳು ಕೇಳಿಬಂದಿವೆ.

ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ, ಹಿರಿಯ ಕಾಂಗ್ರೆಸ್​ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಗೊಂದಲಗಳು ಹೈಕಮಾಂಡ್’ಗೆ ಎದುರಾಗಲಿದೆ.

ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆದಿದ್ದು, ಶಾಸಕರ ವೋಟಿಂಗ್ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವ ತೀರ್ಮಾನಕ್ಕೆ ಹೈಕಮಾಂಡ್ ಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

 

Related