ಬಡವರಿಗೆ ನಿವೇಶನ ನೀಡುವ ಗುರಿ: ಕೆ.ಹೆಚ್ ಮುನಿಯಪ್ಪ

ಬಡವರಿಗೆ ನಿವೇಶನ ನೀಡುವ ಗುರಿ: ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯಲ್ಲಿ 533.38 ಎಕರೆ ಆಶ್ರಯ ಯೋಜನೆಯಡಿ  ಜಮೀನು ಗುರ್ತಿಸಲಾಗಿದ್ದು 480 ಎಕರೆ ನಿವೇಶನ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಸತಿ ನಿಗಮದಿಂದ 64.18 ಎಕರೆಯಲ್ಲಿ 1694 ನಿವೇಶನಗಳ ಅಭಿವೃದ್ಧಿಗೆ ಆನುದಾನ ಬಿಡುಗಡೆ ಆಗಿದ್ದು 292 ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ನಿವೇಶನಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಿವೇಶನ ಅಭಿವೃದ್ಧಿಗೆ ಸಂಬಂಧಿಸಿ ಆನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು. ಇದನ್ನೂ ಓದಿ: ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ

ಜೆ.ಜೆ.ಎಂ.ಯೋಜನೆಯಡಿ ಮನೆ ಮನೆಗೂ ನಳ ಸಂಪರ್ಕ ಕಲ್ಪಿಸಲು ರಸ್ತೆ ಅಗೆದಿದ್ದು ಮುಚ್ಚದೇ ಹಾಗೆ ಬಿಟ್ಟಿರುವುದು, ನೀರು ಸರಬರಾಜು ಪೈಪ್ ಗಳ ಗುಣಮಟ್ಟ ಕಳಪೆ ಆಗಿದೆ ಎಂಬ ದೂರಿನ ಅನ್ವಯ, ಯಾವ ಯಾವ ಹಳ್ಳಿಗಳಲ್ಲಿ ಈ ರೀತಿಯ ಅವ್ಯವಸ್ಥೆ ಆಗಿದೆ ಎಂಬುದರ ಮಾಹಿತಿ ಪಡೆದೆ ಖದ್ದಾಗಿ ಅಧಿಕಾರಿಗಳು ಸ್ಥಳ ಪರಶೀಲನೆ ನಡೆಸಿ ಅವ್ಯವಸ್ಥೆಯನ್ನು ಸರಿಪಡಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಕೆ.ಪಿ.ಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆ.ಪಿ.ಎಸ್ ಶಾಲೆಗಳಿಗೆ ಅವಶ್ಯವಿರುವ ಸೌಕರ್ಯಗಳ ಬಗ್ಗೆ ತಾಲ್ಲೂಕು ಬಿ.ಇ.ಒ ಗಳು ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಯೋಜನೆ ಸಿದ್ಧಪಡಿಸಿ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಶಿಕ್ಷಕರು ಹೆಚ್ಚು ಶ್ರಮ ವಹಿಸಬೇಕಿದೆ. ಖಾಸಗಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯ ಸರ್ಕಾರಿ ಶಾಲೆಗಳಲ್ಲಿ ಸಿಗುವಂತೆ ಮಾಡಬೇಕು. ಸಿ.ಆರ್.ಪಿ./ ಬಿ.ಆರ್.ಪಿ. ಗಳು ಶಾಲೆಗಳಿಗೆ ಹೆಚ್ಚಿನ ಭೇಟಿ ನೀಡಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದರು.

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ  ಅಂಡರ್ ಪಾಸ್ ನಿರ್ಮಾಣಕ್ಕೆ ನೆಲಮಂಗಲ ಶಾಸಕರ ಒತ್ತಾಯ

ನೆಲಮಂಗಲ ವ್ಯಾಪ್ತಿಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಲಿದ್ದು ನೆಲಮಂಗಲ ತುಮಕೂರು ಹೈವೇ ಯಲ್ಲಿ ಪ್ರತಿ ದಿನ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ ಸರಿಯಾದ ಕೆಳ ಸೇತುವೆ(ಅಂಡರ್ ಪಾಸ್) ಇಲ್ಲದಿರುವುದು. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಸದ ಸಮಸ್ಯೆ ಕೂಡ ಹೆಚ್ಚಾಗಿದ್ದು ಕಸ ತೆರವುಗೊಳಿಸಬೇಕು. ಅಪಘಾತಗಳನ್ನು ತಪ್ಪಿಸಲು ಅಂಡರ್ ಪಾಸ್ ನಿರ್ಮಿಸುವಂತೆ ಶಾಸಕರು ಸಚಿವರಲ್ಲಿ ಮನವಿ ಮಾಡಿದರು. ಸಚಿವರು ಮನವಿಗೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

 

Related