ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡು ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಬಹುಮತದಿಂದ ಗೆದ್ದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ಹೌದು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ. ಅಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ರಾಜ್ಯ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದೂ ಕಂಡುಬಂದಿದೆ.
ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ವಿಪಕ್ಷ ನಾಯಕ ಸ್ಥಾನ ಸೇರಿದಂತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ.