ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ೨೫೦೦ ಕೋಟಿ ರೂ. ನೀಡಿದರೆ ಮುಖ್ಯಮಂತ್ರಿ ಸ್ಥಾನ ದೊರಕುತ್ತದೆ ಎಂದು ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರತಿಭಟನೆ ನಡೆಸಿತು.
ಕರ್ನಾಟಕದಲ್ಲಿ ಎಲ್ಲ ಸರ್ಕಾರಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆಯುತ್ತಿರುವುದು ಬಹಿರಂಗವಾಗಿದೆ. ಈಗ ಮಂತ್ರಿ ಸ್ಥಾನ, ಮುಖ್ಯಮಂತ್ರಿ ಸ್ಥಾನ ಪಡೆಯಲು ಸಹ ವ್ಯಾಪಾರ ಪ್ರಾರಂಭವಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಹೇಳಿದರು.
ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗ ಪಡಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೇಶದ ಜನತೆಗೆ ಸ್ಪಷ್ಟನೆ ನೀಡಬೇಕು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಹರಾಜಿಗೆ ಇದೆಯೇ ಎಂಬುದನ್ನು ತಿಳಿಸಬೇಕು ಎಂದು ಅವರು ಆಗ್ರಹಿಸಿದರು.
ಜನಸಾಮಾನ್ಯರು ಈ ಭ್ರಷ್ಟ ಹಾಗೂ ಸರ್ವಾಧಿಕಾರಿ ಆಡಳಿತದಲ್ಲಿ ಬದುಕಲು ಸಾಧ್ಯವಿಲ್ಲ. ಕೂಡಲೇ ರಾಜ್ಯ ಹಾಗೂ ರಾಷ್ಟ್ರದಲ್ಲಿ ಬಿಜೆಪಿ ತೊಲಗದೆ ಹೋದರೆ ಭ್ರಷ್ಟಾಚಾರ ಹಗಲು ಲೂಟಿ ಹೆಚ್ಚುತ್ತದೆ ಮಾತನಾಡಿದರು.
ಈ ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಜಿ. ಜನಾರ್ಧನ್, ಮುಖಂಡರಾದ ಎ.ಆನಂದ್ ಹಾಗೂ ಆದಿತ್ಯ, ಪ್ರಕಾಶ್, ಹೇಮರಾಜ್, ವೆಂಕಟೇಶ್, ನವೀನ್, ಪುಟ್ಟರಾಜು, ಮಂಜುನಾಥ್, ಅನಿಲ್, ಸುಪ್ರಜ್, ಶೀಲಮ್ಮ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.