ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಸಿಎಂ

ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ: ಸಿಎಂ

ಗದಗ,ಡಿ. 17: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕ.ರ.ಸಾ.ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು ಎಂದರು.

ಜಾತಿ ಜನಗಣತಿ: *ವರದಿ ಬರುವ ಮುನ್ನವೇ ವೈಜ್ಞಾನಿಕವಲ್ಲ ಎನ್ನುವುದು ಸರಿಯಲ್ಲ
ಕಾಂತರಾಜು ವರದಿಯ ಕುರಿತು ಮಾತನಾಡಿ ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ ಎಂದರು. ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ . ಕೆಲವರು ವರದಿ ವೈಜ್ಞಾನಿಕ ವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ವರದಿ ಬರಲಿ ನೋಡೋಣ ಎಂದರು. ಶ್ರೀ ಶೈಲ ಜಗದ್ಗುರು ಚನ್ನಸಿದ್ಧರಾಮ ಸ್ವಾಮೀಜಿ 2 ವರ್ಷಗಳ ನಂತರ ವರದಿ ಬಿಡುಗಡೆ ಮಾಡಲಿ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆಯಾಗಲಿ ನನಗೇ ಆಗಲಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ವರದಿ ಬರುವ ಮುನ್ನವೇ ವೈಜ್ಞಾನಿಕ ವಲ್ಲ ಎನ್ನುವುದು ಸರಿಯಲ್ಲ ಎಂದರು.

ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ
ಶಕ್ತಿ ಯೋಜನೆಗೆ ಸರ್ಕಾರ ಮೀಸಲಿಟ್ಟ ಹಣ ಪೂರ್ಣಗೊಂಡಿದೆ ಎಂಬ ಬಗ್ಗೆ ಉತ್ತರಿಸಿ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು ಎಂದರು. ಶಕ್ತಿ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿಗೆ ಸರ್ಕಾರ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ ಎಂದರು. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ ಎಂದರು. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ .
ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದರು.

ಕೊಟ್ಟ ಮಾತಿನಂತೆ ನಡೆದಿದ್ದೇವೆ
ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ 70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73, 928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು ಎಂದರು. 3000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈ ನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ . 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದರು.

ಕೋವಿಡ್ ಹೊಸ ತಳಿ: ಮುನ್ನೆಚ್ಚರಿಕಾ ಕ್ರಮ
ಕರೊನಾ ಇಡೀ ದೇಶದಲ್ಲಿ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರು ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ.

ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ
ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಎಲ್ಲಿಗೆ ಬೇಕಾದರೂ ವಹಿಸಲು ಸಿದ್ದ ಎಂದರು. ತನಿಖೆಯಾಗಿ ತಪ್ಪಿತಸ್ಥ ರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ ಎಂದರು.

ಬಡ್ಡಿ ಮನ್ನಾ
ಕ್ಯಾಶ್ ಕಾರ್ಡ್ ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದರು.

ಪರಿಹಾರ ಸೂತ್ರ
ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿದ್ದಾರೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದರು. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ ಎಂದರು

Related