ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಯಿಂದ ನಾಡಿನ ಜನತೆ ದಾರಿ ತಪ್ಪುತ್ತಿದ್ದಾರೆ ಎಂಬ ಅವಹೇಳನಕಾರಿ ಮಾತನ್ನು ಹೇಳಿದ್ದರು.
ಇದಕ್ಕೆ ಪ್ರತ್ಯುತ್ತರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಿರು ಕೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಏಕವಚನದಲ್ಲೇ ಬಾಗ್ದಾಳಿ ನಡೆಸಿದ್ದಾರೆ.
‘ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ. ಮಿಸ್ಟರ್ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ’ ಎಂದರು. ನಾನು ಕಲ್ಲು ಲೂಟಿ ಮಾಡಿದೆನೋ, ಮೋಸ ಮಾಡಿದೆನೋ ಎಂಬ ಬಗ್ಗೆ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.
ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೆಚ್ಡಿಕೆ ಹೇಳಿದ್ದಾರೆ. ಇದನ್ನು ನಾವು ಖಂಡಿಸಬೇಕು. ನಾನು ಎಲ್ಲ ಮಹಿಳಾ ಸಂಘಟನೆಗಳಿಗೆ ಕರೆ ಕೊಡ್ತೇನೆ, ನಿಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಿ. ಪ್ರತಿಯೊಂದು ತಾಲೂಕಿನಲ್ಲಿ ಹೋರಾಟ ಮಾಡಬೇಕು. ಒಂದು ಪಕ್ಷದ ಅಧ್ಯಕ್ಷನಾಗಿ ನಾನು ಈ ಕರೆ ಕೊಡ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.