ಜಂಪಿಂಗ್ ಪಾಲಿಟಿಕ್ಸ್

 ಜಂಪಿಂಗ್ ಪಾಲಿಟಿಕ್ಸ್

ಬೆಂಗಳೂರು, ಫೆ. 06: ಬಹುನಿರೀಕ್ಷಿತ ರಾಜ್ಯ ಬಿಜೆಪಿ ಸರ್ಕಾರದ ನೂತನ ಸಂಪುಟ ವಿಸ್ತರಣೆ ಇಂದು ಆಗಿದೆ. ಉಪ ಚುನಾವಣೆಯಲ್ಲಿ ಗೆದ್ದಂತ 10 ಶಾಸರಕು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಳಗ್ಗೆ 10:30ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭ ಆರಂಭವಾಯ್ತು. ರಾಜ್ಯಪಾಲ ವಜುಭಾಯಿ ವಾಲಾ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮೊದಲಿಗೆ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಪ್ರಮಾಣವಚನ ಸ್ವೀಕಾರ ಮಾಡಿ, ಪ್ರಮಾಣಪತ್ರಕ್ಕೆ ಸಹಿ ಹಾಕಿದರು. ಈ ವೇಳೆ ಅವರು ಸಿಎಂ. ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿದ್ದು ವಿಶೇಷ.

ಬಳಿಕ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್ ಸಿಂಗ್, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್, ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪ್ರಮಾಣವಚನ ಸ್ವೀಕರಿಸಿದರು.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ದೇವರು ಹಾಗೂ ತಂದೆ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ ಪಾಟೀಲ್ ಕ್ಷೇತ್ರದ ಜನತೆ, ತಂದೆ -ತಾಯಿ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೆ.ಆರ್ ಪೇಟೆ ಶಾಸಕ ಕೆ.ಸಿ ನಾರಾಯಣಗೌಡ ಹಾಗೂ ಕೊನೆಯಲ್ಲಿ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿ, ಪ್ರಮಾಣಪತ್ರ ಸ್ವೀಕರಿಸಿದರು.

ರಾಜ್ಯಪಾಲ ವಿ.ಆರ್ ವಾಲಾ ಹಾಗೂ ಸಿಎಂ ಯಡಿಯೂರಪ್ಪ ಎಲ್ಲಾ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ನೂತನ ಸಚಿವರಿಗೆ ಅಭಿಮಾನಿಗಳು ಜೈಕಾರ ಹಾಕಿದರು. ಕಾರ್ಯಕ್ರಮದ ನಂತರ ರಾಷ್ಟ್ರಗೀತೆ ಮೊಳಗಿತು.

 

Related