ಮಾಜಿ ಶಾಸಕರ ಮೊಮ್ಮಕ್ಕಳು ಶವ ಪತ್ತೆ; ವಾಮಾಚಾರದ ಶಂಕೆ

ಮಾಜಿ ಶಾಸಕರ ಮೊಮ್ಮಕ್ಕಳು ಶವ ಪತ್ತೆ; ವಾಮಾಚಾರದ ಶಂಕೆ

ರಾಯಚೂರು: ಮಾನ್ವಿಯ ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಪ್ರಕರಣ ಹಲವಾರು ಅನುಮಾನಗಳನ್ನ ಸೃಷ್ಟಿಸಿದೆ. ಈ ಇಬ್ಬರು ಬಾಲಕರನ್ನ ಕೊಲೆ ಮಾಡಿ ಹಳ್ಳದಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಶವ ಪತ್ತೆಯಾದ ಸ್ಥಳದಲ್ಲಿ ವಾಮಾಚಾರಕ್ಕೆ ಬಳಸುವ ವಸ್ತುಗಳು ಸಿಕ್ಕಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮಾ. 7ರ ಮಧ್ಯಾಹ್ನ 2 ಗಂಟೆ ವೇಳೆಗೆ ರಾಯಚೂರಿನ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ಕಾಣೆಯಾಗಿದ್ದ ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳು ಮರುದಿನ ಬೆಳಗ್ಗೆ, ಅಂದರೆ ನಿನ್ನೆ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಇಡೀ ದಿನ ಹಾಗೂ ಬೆಳಗಿನ ಜಾವ 3 ಗಂಟೆವರೆಗೂ ಗ್ರಾಮದಲ್ಲಿ, ಹಳ್ಳದಲ್ಲಿ ಹುಡುಕಿದರೂ ಸಿಗದ ಮಕ್ಕಳು ಬೆಳಿಗ್ಗೆ 10 ಗಂಟೆ ಸುಮಾರಿಗೆ ಹಳ್ಳದಲ್ಲಿ ಪತ್ತೆಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ವರುಣ್ (9), ಸಣ್ಣಯ್ಯ (5) ಮೃತ ಬಾಲಕರಾಗಿದ್ದು, ಹಳ್ಳದಲ್ಲಿ ಮೊಣಕಾಲು ಮಟ್ಟಕ್ಕೆ ನೀರಿದ್ದು ಮಕ್ಕಳು ಈಜಲು ಬಂದೂ ಕೂಡ ಸಾವನ್ನಪ್ಪಿದ್ದಾರೆ. ಸಾಧ್ಯವಿಲ್ಲ ಅಂತ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಈ ಹಿಂದೆಯೂ ಇದೇ ರೀತಿ ಅನುಮಾನಾಸ್ಪದವಾಗಿ 4 ಮಕ್ಕಳು ಸಾವನ್ನಪ್ಪಿದ್ದಾರೆ. ಈಗ ಪುನಃ ಘಟನೆ ಮರುಕಳಿಸಿರುವುದರಿಂದ ಮಕ್ಕಳ ಸಾವಿನ ಹಿಂದೆ ಬಲವಾದ ಕಾರಣವಿದೆ ಎಂದು ಅನುಮಾನ ಮೂಡಿದೆ. ಅಲ್ಲದೇ ಬಾಲಕರ ಶವಪತ್ತೆಯಾದ ಸ್ಥಳದಲ್ಲಿ ವಾಮಾಚಾರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿವೆ. ಹೀಗಾಗಿ ಸಿರವಾರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದ ಆ ಬಾಲಕರ ಕುಟುಂಬ ಕೊಲೆ ಶಂಕೆ ಪ್ರಕರಣ ದಾಖಲಿಸಲು ಮುಂದಾಗಿದೆ. ಪ್ರಭಾವಿ ರಾಜಕಾರಣಿ ಮೊಮ್ಮಕ್ಕಳಿಗೆ ರಕ್ಷಣೆಯಿಲ್ಲದೆ ಹೋದರೆ ಸಾಮಾನ್ಯರ ಗತಿ ಏನು ಅಂತ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಸಿರವಾರ ಹಾಗೂ ಕವಿತಾಳ ಠಾಣೆ ಪೊಲೀಸರಿಂದ ಬಾಲಕರಿಗಾಗಿ ಹುಡುಕಾಟ ನಡೆದಿತ್ತು. ಗ್ರಾಮದ ಹಳ್ಳದಲ್ಲೇ ಸೋಮವಾರ ಬೆಳಗ್ಗೆ ಶವಗಳು ಪತ್ತೆಯಾಗಿವೆ. ತನಿಖೆ ಆರಂಭಗೊಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ಕಾರಣ ತಿಳಿದು ಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್ ಹೇಳಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಹಂಪಯ್ಯ ನಾಯಕ್ ಕುಟುಂಬ ದುಃಖದಲ್ಲಿ ಮುಳುಗಿದೆ.

ಆದ್ರೆ ಸಾವಿನ ಬಗ್ಗೆ ಅನುಮಾನಗಳು ಇರುವುದರಿಂದ ಇದೊಂದು ವ್ಯವಸ್ಥಿತ ಕೊಲೆ ಎಂದು ಶಂಕಿಸಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related