ಸಕಲೇಶಪುರ: ಲೋಕಸಭಾ ಚುನಾವಣೆ ನಂತರ ಕರ್ನಾಟಕದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಇಲ್ಲ. ಹಾಗಿದ್ದರೆ ಕಾಂಗ್ರೆಸ್ನವರ 5 ಗ್ಯಾರಂಟಿಗಳನ್ನು ಹೇಗೆ ಜನರು ನಂಬುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಗಳ ಕುರಿತು ವ್ಯಂಗ್ಯವಾಡಿದ್ದಾರೆ.
ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರೆಂಟಿ, ಗ್ಯಾರಂಟಿ ಎಂದು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷ ಚುನಾವಣೆ ನಂತರ ಇರುವುದೇ ಗ್ಯಾರಂಟಿ ಇಲ್ಲವೆಂದು ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ. ಅಂದ ಮೇಲೆ ಅವರ ಗ್ಯಾರಂಟಿಗಳು ಮುಂದುವರಿಯುವ ಬಗ್ಗೆ ಹೇಗೆ ಗ್ಯಾರಂಟಿ ನೀಡುತ್ತಾರೆ ಎಂದರು.
ನಮ್ಮ ದೇಶವನ್ನು ಸಮರ್ಥವಾಗಿ ಮುನ್ನಡೆಸುವ ಶಕ್ತಿ ಇರುವುದು ಬಿಜೆಪಿ ನೇತೃತ್ವದ ಎನ್ಡಿಎಗೆ ಮಾತ್ರ. ಕಾಂಗ್ರೆಸ್ ನೇತೃತ್ವದಲ್ಲಿ ಹತ್ತಾರು ಪಕ್ಷಗಳು ಒಗ್ಗೂಡಿ ಕಟ್ಟಿರುವ ಒಕ್ಕೂಟಕ್ಕೆ ಈವರೆಗೆ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇನ್ನು, 150 ಕೋಟಿ ಜನರಿರುವ ದೇಶವನ್ನು ಮುನ್ನಡೆಸುವುದು ಹೇಗೆ ಎಂಬುದನ್ನು ಜನ ಚಿಂತನೆ ನಡೆಸಬೇಕಿದೆ ಎಂದು ವ್ಯಂಗ್ಯವಾಡಿದರು.