ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ದಿನ ಗಣನೆ ಪ್ರಾರಂಭವಾಗಿದ್ದು, ಕೇವಲ ಆರು ದಿನಗಳ ಬಾಕಿ ಇದ್ದು, ಆಡಳಿತ ಕಾಂಗ್ರೆಸ್ ಪಕ್ಷದ ಮೇಲೆ ವಿರೋಧ ಪಕ್ಷ ಆರೋಪಗಳ ಮೇಲೆ ಆರೋಪ ಮಾಡುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಇಂದು (ಶನಿವಾರ ಏಪ್ರಿಲ್ 20) ರಂದು ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್ಶೀಟ್ ಬಿಡುಗಡೆ ಮಾಡಿದೆ.
ಇನ್ನು ಈ ಸಂಬಂಧ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಚಾರ್ಜ್ಶೀಟ್ ಬಿಡುಗಡೆ ಮಾಡಿದ್ದಾರೆ.
ನಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಕೊಲೆ, ದರೋಡೆ , ಸುಲಿಗೆ ಇನ್ನಿತರ ಪ್ರಕರಣಗಳು ಕಡಿಮೆ ಇದ್ದವು. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಎಲ್ಲವೂ ದುಪ್ಪಟ್ಟಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿದೆ. ತನಿಖೆ ಆರಂಭವಾಗುವ ಮುನ್ನವೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಉಳಿಸಲು ಪ್ರಯತ್ನಿಸುತ್ತಿದೆ ಎಂದರು.