ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹದ ಹಿನ್ನೆಯಲ್ಲಿ ಲೋಕಾಯುಕ್ತ ಕಾಯಿದೆ ಜಾರಿಗೆ ತರಲಾಗಿದ್ದು, ಈ ಕಾಯಿದೆಯಲ್ಲಿ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ಮಾಡಲು ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಲೋಕಾಯುಕ್ತರಿಗೆ ಬರೆದಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವೈಟ್ಫೀಲ್ಡ್ ಬಳಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ವಿದ್ಯುತ್ ಅವಘಡ ಸಂಭವಿಸಿ ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ನೋವಿನ ಸಂಗತಿ. ಈ ಘಟನೆಗೆ ಕಾರಣರಾದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಬಾದಿತ ಕುಟುಂಬಕ್ಕೆ ನ್ಯಾಯ ದೊರಕಿಸುವುದರ ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಜರುಗಿಸುವುದು ಪ್ರತೀ ಸರ್ಕಾರದ ಕರ್ತವ್ಯವಾಗಿರುತ್ತದೆ. ತಾವು ಈ ಪ್ರಕರಣದಲ್ಲಿ ಮತ್ತು ಇತ್ತೀಚೆಗೆ ಅತ್ತಿಬೆಲೆ ಬಳಿಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುವುದು ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ ಎಂದಿದ್ದಾರೆ.
ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತದಲ್ಲಿ ಸಾವಿರಾರು ಪ್ರಕರಣಗಳು ಕಾರ್ಯಾಂಗ ಮತ್ತು ಶಾಸಕಾಂಗದ ಮೇಲೆ ದಾಖಲಾಗಿರುತ್ತದೆ. ಜನಸಾಮಾನ್ಯರು ರಾಜ್ಯದಲ್ಲಿ ನಡೆಯುತ್ತಿರುವ ಮಿತಿಮೀರಿದ ಭ್ರಷ್ಟಾಚಾರದ ವ್ಯವಸ್ಥೆಯಿಂದ ರೋಸಿಹೋಗಿದ್ದಾರೆ. ಭ್ರಷ್ಟಾಚಾರದ ಪಿಡುಗು ಇಡೀ ವ್ಯವಸ್ಥೆಯನ್ನು ಹಾಳು ಮಾಡಿದೆ. ಲೋಕಾಯುಕ್ತ ಪ್ರಬಲ ಸಂಸ್ಥೆಗಳು ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೋರಿದ್ದಾರೆ.
ಕರ್ನಾಟಕದ ಲೋಕಾಯುಕ್ತ ಸಂಸ್ಥೆಯು ಕಾರ್ಯಾಂಗ ಮತ್ತು ಶಾಸಕಾಂಗದ ಮೇಲೆ ಬರುವ ಭ್ರಷ್ಟಾಚಾರ ಮತ್ತು ಕರ್ತವ್ಯಲೋಪದ ಪ್ರಕರಣಗಳನ್ನು ಆದ್ಯತೆಯ ಮೇಲೆ ತೆಗೆದುಕೊಂಡು ಕ್ರಮ ಜರುಗಿಸಬೇಕಾಗಿದೆ. ಪ್ರತೀ ಪ್ರಕರಣಕ್ಕೂ ಕಾಲಮಿತಿ ನಿಗಧಿಗೊಳಿಸಿ ದೂರುಗಳನ್ನು ಇತ್ಯರ್ಥ ಮಾಡುವಂತೆ ರಮೇಶ್ ಬಾಬು ವಿನಂತಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ ಈ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಬೇಕೆಂದು ರಮೇಶ್ ಬಾಬು ಅವರು ಮನವಿಯಲ್ಲಿ ವಿನಂತಿಸಿದ್ದಾರೆ.