ನಗರಸಭೆ ಮುಂದೆ ಮುಖಂಡರ ಪ್ರತಿಭಟನೆ

ನಗರಸಭೆ ಮುಂದೆ ಮುಖಂಡರ ಪ್ರತಿಭಟನೆ

ದೊಡ್ಡಬಳ್ಳಾಪುರ : ನಗರಸಭೆ ವ್ಯಾಪ್ತಿಯಲ್ಲಿ ಈಚೆಗೆ ಶಾಸಕ ಟಿ. ವೆಂಕಟರಮಣಯ್ಯ ನಗರದ ಹಲವು ಕಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಾಗಿದೆ.

ಈ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರು ದೂರಿದ್ದಾರೆ.

ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್.ಎಸ್ ಶಿವಶಂಕರ್, ಜಿಲ್ಲಾ ವಕ್ತಾರರಾದ ಪುಷ್ಪಾ ಶಿವಶಂಕರ್, ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಸಂತೋಷದ ವಿಷಯ. ಆದರೆ, ಈ ಕಾಮಗಾರಿ ಉದ್ಘಾಟನೆಗೆ ಶಿಷ್ಟಾಚಾರದಂತೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದರು.

ಸರ್ಕಾರದ ಅನುದಾನ ಶಾಸಕರ  ಅನುದಾನವೆಂಬಂತೆ  ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಶಂಕುಸ್ಥಾಪನೆ ನಡೆದಿರುವುದು ಖಂಡನೀಯ. ಇನ್ನು ಮುಂದೆ ನಗರಸಭೆ ವ್ಯಾಪ್ತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಶಿಷ್ಟಾಚಾರ ಅನುಸರಿಸಿ ಸಂಸದರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.  ನಗರದಲ್ಲಿನ ಕಾಮಗಾರಿಗಳಿಗೆ ಮಂಜೂರಾಗಿದ್ದ 8ಕೋಟಿ ಹಿಂದಕ್ಕೆ ಹೋಗುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಗೆ ಪ್ರತಿಯಾಗಿ ಪ್ರತಿಭಟನೆ ಆರಂಭಿಸಿದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಆಚರಿಸಬೇಕಾದ್ದು ಅಧಿಕಾರಿಗಳ ಕೆಲಸವೇ ಹೊರತು ನನ್ನದಲ್ಲ. ಕೋವಿಡ್-19 ಕಾರಣ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುವಂತಿಲ್ಲ ಎಂಬ ನಿಯಮ ವಿದೆ. ಆದಾಗ್ಯೂ ಮುಂದಿನ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

Related