ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ: ಡಿಸಿಎಂ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ: ಡಿಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಸೆಕ್ಯುರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ ಕೆಲಸ ಮಾಡಬೇಕೋ ಅವರು ಅದನ್ನೇ ಮಾಡಬೇಕು.

ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ. ನಮಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ.

ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲಾ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.

Related