ಶಾಲಾಮಕ್ಕಳಿಗೆ ಸಮವಸ್ತ್ರ ನೀಡುವಲ್ಲಿ ನಾಗೇಶ್ ಬೇಜವಾಬ್ದಾರಿ – ಸಿದ್ದು ಟಾಂಗ್

ಶಾಲಾಮಕ್ಕಳಿಗೆ ಸಮವಸ್ತ್ರ ನೀಡುವಲ್ಲಿ ನಾಗೇಶ್ ಬೇಜವಾಬ್ದಾರಿ – ಸಿದ್ದು ಟಾಂಗ್

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

Related