ವಿಜಯಪುರ: ಸಿಂದಗಿ ಕ್ಷೇತ್ರದ ಉಪಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಜೆಡಿಎಸ್ ಮಾಜಿ ಸಚಿವ ದಿವಂಗತ ಎಂಸಿ ಮನಗೂಳಿ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಮುಖಂಡ ಪ್ರಕಾಶ್ ರಾಥೋಡ್ ಸಿದ್ದರಾಮಯ್ಯ ಜೊತೆ ಸಭೆ ಆಯೋಜಿಸಿದ್ದರು. ಕಾಂಗ್ರೆಸ್ಗೆ ಸೇರಿದರೇ ಮಾತ್ರ ಅಶೋಕ್ ಬೆಂಬಲಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾಗಿ ಪ್ರಕಾಶ್ ರಾಥೋಡ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರಿದರು.
ನನ್ನ ಕುಟುಂಬಸ್ಥರು ಮತ್ತು ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ಕಾಂಗ್ರೆಸ್ ಸೇರಿದ್ದೇನೆ, ನಾನು ಟಿಕೆಟ್ಗೆ ಬೇಡಿಕೆ ಇಟ್ಟಿಲ್ಲ, ಆದರೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ತೆಗೆದುಕೊಂಡಿದ್ದೇನೆ ಎಂದು ಅಶೋಕ್ ಮನಗೂಳಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ಅಲ್ಲಂ ವೀರಭದ್ರಪ್ಪ, ಶಿವಾನಂದ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.