ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕಾ ಸಂಘದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಕೋವಿಡ್ -19 ಲಸಿಕೆ ಪಡೆದು ಕೊಳ್ಳಲು ಇಚ್ಛಿಸುವವರನ್ನು ಕೋವಿಡ್ ಲಸಿಕಾ ಕೇಂದ್ರಗಳಿಗೆ ಕರೆತರುವ ಸಾರಿಗೆ ವ್ಯವಸ್ಥೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಕೈಗಾರಿಕಾ ಸಂಘದಿಂದ ಫೇಸ್ ಮಾಸ್ಕ್ ಗಳನ್ನು ನೀಡಲಾಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ. ರಂಗಪ್ಪ, ಹೊಸಕೋಟೆ ತಹಶೀಲ್ದಾರ್ ಗೀತಾ, ಕೈಗಾರಿಕಾ ಇಲಾಖೆ ನಿರ್ದೇಶಕ ನರೇಂದ್ರ ಬಾಬು, ದೊಡ್ಡಬಳ್ಳಾಪುರ ಕೈಗಾರಿಕಾ ಸಂಘದ ಅಧ್ಯಕ್ಷ ಆಂಜನೇಯಲು, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.