ಧಾರವಾಡ : ರಾಜ್ಯದಲ್ಲಿ ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿ.ಪಂ ಆವರಣದಲ್ಲಿ 1.4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ, ಪಾಧ್ಯಕ್ಷರು, ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ರಾಮ ಮತ್ತು ಜಿ.ಪಂ ವ್ಯವಸ್ಥೆ ಜಾರಿ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವ ಉದ್ದೇಶವಿದೆ ಎಂದರು.
ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಿಗೆ ಎರಡು ಹಂತದ ವ್ಯವಸ್ಥೆ ಜಾರಿಗೆ ಸಂಪೂರ್ಣ ಸಹಮತವಿದೆ. ಸಂವಿಧಾನದಲ್ಲಿ ಮೂರು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಚಿಸಿರುವುದರಿಂದ ಅನುಷ್ಠಾನ ಅನಿವಾರ್ಯವಾಗಿದೆ. ಇದನ್ನು ಬದಲಾಯಿಸಲು ಕೋರಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಸಂವಿಧಾನಕ್ಕೆ ತಿದ್ದುಪಡಿಯಾದರೆ ಮಾತ್ರ ಬದಲಾವಣೆ ಸಾಧ್ಯ ಎಂದರು.