ನಮ್ಮ ದಿನನಿತ್ಯದ ಚಟುವಟಿಕೆಯಲ್ಲಿ ಹಲವಾರು ಆರೋಗ್ಯದ ಸಮಸ್ಯೆಗಳು ಕಂಡುಬರುತ್ತ.ವೆ ಇಂತಹ ಆರೋಗ್ಯ ಸಮಸ್ಯೆಗಳನ್ನು ನಾವು ಕೆಲವು ಹಣ್ಣು ತಿನ್ನುವುದರಿಂದ ನಿಯಂತ್ರಣ ಮಾಡಬಹುದು.
ಹೌದು, ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ರೋಗ ಎಂದರೆ ಅದು ಮಧುಮೇಹ. ಇಂತ ಮಧುಮೇಹ ಕಾಯಿಲೆಯನ್ನು ತಡೆಗಟ್ಟಲು ಪೇರಳೆ ಹಣ್ಣು ಬಹಳ ಪ್ರಯೋಜನಕಾರಿಯಾಗಿದೆ. ಪೇರಳೆಯನ್ನು ನಿಯಮಿತವಾಗಿ ಸೇವಿಸುವುದರಿಂದ, ಅದರಲ್ಲಿರುವ ಗ್ಲೈಸೆಮಿಕ್ ಇಂಡೆಕ್ಸ್ ಕಾರಣದಿಂದಾಗಿ, ಮಧುಮೇಹವನ್ನು ನಿಯಂತ್ರಿಸಬಹುದು. ಪೇರಳೆ ಹಣ್ಣಿನಲ್ಲಿ ನ್ಯಾಚುರಲ್ ಶುಗರ್ ಇರುತ್ತದೆ. ಇದು ಮಧುಮೇಹಕ್ಕೆ ಪ್ರಯೋಜನಕಾರಿಯಾಗಿದೆ.
ಮಲಬದ್ದತೆಯ ರೋಗಿಗಳಿಗೆ ಇದು ಸಹಾಯಕ. ಪೇರಳೆ ಹಣ್ಣಿನ ಬೀಜಗಳು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸರಿಯಾಗಿ ಆದರೆ ಮಲಬದ್ದತೆಯ ಸಮಸ್ಯೆ ಕೂಡ ಇರುವುದಿಲ್ಲ.
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ : ಪೇರಳೆ ಹಣ್ಣಿನಲ್ಲಿ ಕಂಡುಬರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದೆ ಪೇರಳೆಯಲ್ಲಿ ನಾಲ್ಕು ಪಟ್ಟು ವಿಟಮಿನ್ ಸಿ ಕಂಡುಬರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ಕಣ್ಣುಗಳನ್ನು ಆರೋಗ್ಯವಾಗಿಡಲು ಪೇರಳೆ ಹಣ್ಣನ್ನು ಅತ್ಯುತ್ತಮ ಹಣ್ಣು ಎಂದು ಪರಿಗಣಿಸಲಾಗಿದೆ. ವಿಟಾಮಿನ್ ಎ ಈ ಹಣ್ಣಲ್ಲಿ ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ.
ಸೀಬೆ ಹಣ್ಣಿನಲ್ಲಿ ಶರೀರಕ್ಕೆ ಅಗತ್ಯವಿರುವ ವಿವಿಧ ಪೋಷಕಾಂಶಗಳು ಸಾಕಷ್ಟಿವೆ. ಹಣ್ಣು ದೊರೆಯುವ ಅವಧಿಯಲ್ಲಿ ಯಥೇಚ್ಛವಾಗಿ ಬಳಸಿ ಲಾಭ ಹೊಂದಬೇಕು. ಅತ್ಯಧಿಕ ಔಷಧೀಯ ಗುಣವಿರುವ ಇದು ಹಿತ್ತಲಗಿಡ. ಇದರ ಬೆಲೆಯೂ ಕಡಿಮೆಯಿದ್ದು, ಆರೋಗ್ಯಕ್ಕೆ ಹೆಚ್ಚು ಉಪಯುಕ್ತ.
ಅಧಿಕ ಪ್ರಮಾಣದ ಶರ್ಕರ ಪಿಷ್ಟಗಳ ಜೊತೆಗೆ ಪ್ರೋಟೀನು, ಸುಣ್ಣ, ರಂಜಕ, ಕಬ್ಬಿಣ ಹಾಗೂ ಕ್ಯಾಲೊರಿ ಸತ್ವಗಳಿರುತ್ತವೆ. ‘ಸಿ’ ಅನ್ನಾಂಗದ ಜೊತೆಗೆ ಇತರ ಅನ್ನಾಂಗಗಳು ಸ್ವಲ್ಪ ಮಟ್ಟಿಗೆ ಇರುತ್ತದೆ.
ಸೀಬೆಹಣ್ಣನ್ನು ರುಚಿಗೋಸ್ಕರ ಇಲ್ಲವೇ ಆಹಾರವಾಗಿ ಬಳಸುವುದು ಮಾತ್ರವಲ್ಲ, ಅದು ಉತ್ತಮ ಔಷಧಿಯ ಗುಣ ಸಹ ಹೊಂದಿದೆ. ಅಧಿಕ ಪ್ರಮಾಣದ ಪ್ರೋಟೀನು ಇರುವ ಕಾರಣ ಮಾಂಸಖಂಡಗಳನ್ನು ಬಲಪಡಿಸಬಲ್ಲದು.
ನಾರಿನ ಅಂಶ ಅಧಿಕವಿರುವ ಕಾರಣ ತಿಂದ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸುವಂತೆ ಮಾಡಬಲ್ಲದು. ಆದ್ದರಿಂದ ಮಲಬದ್ಧತೆಗೆ ಇದು ದಿವ್ಯೌಷಧ. ಈ ಉದ್ದೇಶಕ್ಕಾಗಿ ರಾತ್ರಿ ಊಟದ ನಂತರ ಪ್ರತಿ ನಿತ್ಯ ಒಂದೆರೆಡು ಹಣ್ಣುಗಳನ್ನು ತಿಂದಲ್ಲಿ ಮುಂಜಾನೆ ಸುಖ ವಿರೇಚನ ಸಾಧ್ಯ.
ಹಣ್ಣುಗಳಲ್ಲಿರುವ ಕಬ್ಬಿಣದ ಅಂಶ ರಕ್ತ ಶುದ್ಧಿಗೆ ಸಹಾಯಕ. ಇದು ‘ಸಿ’ ಅನ್ನಾಂಗದ ಒಳ್ಳೆಯ ಮೂಲವಾದ್ದರಿಂದ ಹಲ್ಲಿನ ಒಸಡುಗಳು ಗಟ್ಟಿಗೊಳ್ಳುತ್ತವೆ. ಹಾಗೂ ಸ್ಕರ್ವಿ ರೋಗವನ್ನು ದೂರ ಮಾಡಬಲ್ಲದು.
ಸೀಬೆಯಲ್ಲಿ ಬೆಟಾ ಕೆರಾಟಿನ್, ಪೊಟ್ಯಾಶಿಯಂ ಮತ್ತು ಫೈಬರ್ ಅಂಶ ಹೆಚ್ಚಾಗಿರುವುದರಿಂದ ಇದು ಹೆಚ್ಚು ಉಪಯೋಗಕಾರಿಯಾಗಿದ್ದು ರಕ್ತದಲ್ಲಿನ ಸಕ್ಕರೆ ಅಂಶ ಮತ್ತು ಕೊಲೆಸ್ಟ್ರಾಲ್ ನಿಯಂತ್ರಿಸುವ ಗುಣವನ್ನು ಹೊಂದಿದೆ ಹಾಗೂ ಹೃದಯದ ಸ್ವಾಸ್ಥ್ಯವನ್ನು ಕಾಪಾಡುತ್ತದೆ.
ತೂಕ ಕಡಿಮೆ ಮಾಡಿಕೊಳ್ಳಬೇಕೆಂದಿದ್ದರೆ ಸೀಬೆ ಹಣ್ಣು ಒಳ್ಳೆ ಆಯ್ಕೆ. ಸೀಬೆಯಲ್ಲಿ ಅವಶ್ಯಕ ಕಾರ್ಬೊಹೈಡ್ರೇಟ್ ಮತ್ತು ಫೈಬರ್ ಇರುವುದರಿಂದ ಬೊಜ್ಜನ್ನು ನಿಯಂತ್ರಿಸುತ್ತದೆ. ಸೀಬೆಯಲ್ಲಿ ಕೊಬ್ಬಿನಾಂಶ ಕೇವಲ ೦.೯ ಇದ್ದು, ೮೪ ಕ್ಯಾಲೊರಿ ಮಾತ್ರ ಇರುತ್ತದೆ. ಸೇಬು ಹಣ್ಣಿಗೆ ಹೋಲಿಸಿದರೆ ಸೀಬೆಯಲ್ಲಿ ಶೇ ೪೨ ರಷ್ಟು ಕಡಿಮೆ ಕ್ಯಾಲೊರಿ ಮತ್ತು ಶೇ.೩೮ ರಷ್ಟು ಕಡಿಮೆ ಕೊಬ್ಬಿನಾಂಶವಿದೆ.
ಮಕ್ಕಳಿಗೆ ಕೆಲವರು ಈ ಹಣ್ಣನ್ನು ತಿನ್ನಲು ಕೊಡುವುದಿಲ್ಲ ಅದಕ್ಕೆ ಕಾರಣ ಅವು ಕೆಮ್ಮನ್ನುಂಟುಮಡುತ್ತವೆ ಎಂಬ ಶಂಕೆ. ಆದರೆ ಇದು ತಪ್ಪು. ಎಳೆಯ ಮಕ್ಕಳಿಗೆ ಸಾಕಷ್ಟು ಹಣ್ಣನ್ನು ಕೊಡುತ್ತಿದ್ದಲ್ಲಿ ‘ಸಿ’ ಅನ್ನಾಂಗದ ಅಭಾವ ತಾನೇ ತಾನಾಗಿ ನಿವಾರಣೆಯಾಗುತ್ತದೆ.
ನುಣ್ಣಗೆ ಕುಟ್ಟಿ ಪುಡಿಮಾಡಿದ ಎಲೆಗಳನ್ನು ಸಂಧಿವಾತದಲ್ಲಿ ಬಳಸುತ್ತಾರೆ. ಅವುಗಳ ತಿಳಿರಸ ಅಪಸ್ಮಾರಕ್ಕೆ ಒಳ್ಳೆಯ ಔಷಧಿ. ಎಲೆಗಳನ್ನು ಕುದಿಸಿ ತೆಗೆದ ನೀರನ್ನು ಮುಕ್ಕಳಿಸುತ್ತಿದ್ದಲ್ಲಿ ಒಸಡುಗಳ ಊತ ಮತ್ತು ಹಲ್ಲು ನೋವು ತಗ್ಗುತ್ತದೆ.