ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡುವ ಅವಕಾಶ ಸಿಕ್ಕಿರುವುದು ಬಹಳ ಹೆಮ್ಮೆ: ಡಿಸಿಎಂ

ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡುವ ಅವಕಾಶ ಸಿಕ್ಕಿರುವುದು ಬಹಳ ಹೆಮ್ಮೆ: ಡಿಸಿಎಂ

ಚನ್ನಪಟ್ಟಣ: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿ ಕಾಲೇಜು ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾವೆಲ್ಲರೂ ಇಂದು 78ನೇ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದು, ನನ್ನ ರಾಜಕೀಯ ಬದುಕಿನಲ್ಲಿ ಇದು ವಿಶೇಷವಾದ ದಿನವಾಗಿದೆ ಎಂದರು.

ಮಹಾತ್ಮಾ ಗಾಂಧಿಜಿ ಅವರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಲು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ ಈಗ ನೂರು ವರ್ಷ ಪೂರ್ಣಗೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದಾದಾಬಾಯಿ ನವರೋಜಿ, ಬಾಲಗಂಗಾಧರ ತಿಲಕ್, ಮಹಾತ್ಮಾ ಗಾಂಧೀಜಿ, ನೆಹರೂ, ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸರೋಜಿನಿ ನಾಯ್ಡು, ಲಾಲಲಜಪತ ರಾಯ್, ಗೋಪಾಲ ಕೃಷ್ಣ ಗೋಖಲೆ, ಬಿಪಿನ್ ಚಂದ್ರಪಾಲ್ ಸೇರಿದಂತೆ ಅನೇಕರ ಹೋರಾಟವಿದೆ.

ಸ್ವಾತಂತ್ರ ಹೋರಾಟದಲ್ಲಿ ಸುಮಾರು 6.5 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು, ಸಾವಿರಾರು ಜನ ತಮ್ಮ ಮನೆ, ಮಠ, ಜೀವನವನ್ನೇ ತ್ಯಾಗ ಮಾಡಿದ್ದಾರೆ. ಇದನ್ನೂ ಓದಿ: ಧ್ವಜಾರೋಹಣ ನೆರವೇರಿಸಿದ ಸಚಿವರಾದ ಕೆ.ಹೆಚ್.ಮುನಿಯಪ್ಪ

ಸ್ವಾತಂತ್ರ್ಯಕ್ಕಾಗಿ ಸಾವಿರಾರು ದೇಶಭಕ್ತರು ಬ್ರಿಟೀಷರ ಗುಂಡೇಟಿಗೆ ಎದೆಕೊಟ್ಟು, ನೇಣುಗಂಬಕ್ಕೆ ಜೀವ ಕೊಟ್ಟಿದ್ದಾರೆ. ಕೆಲವರು ಜೈಲಿನಲ್ಲೇ ತಮ್ಮ ಜೀವನ ಕಳೆದಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಈ ಮಹಾನ್ ಹೋರಾಟಗಾರರು ಆಶಯ ಹಾಗೂ ಕನಸುಗಳನ್ನು ನನಸು ಮಾಡಲು ಸ್ವತಂತ್ರ ಭಾರತದ ಪ್ರಜೆಗಳಾದ ನಾವು ಸಂಕಲ್ಪ ಮಾಡಿ ಮುನ್ನಡೆಯಬೇಕಿದೆ.

ಸರ್ಕಾರದ ಪರವಾಗಿ ಇಲ್ಲಿ ಧ್ವಜಾರೋಹಣ ಮಾಡುವ ಅವಕಾಶ ಸಿಕ್ಕಿರುವುದು ಬಹಳ ಹೆಮ್ಮೆಯ ವಿಚಾರ. ಹಿಂದೆ ರಾಮನಗರದ ಕನಕಪುರ ಹಾಗೂ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆ. ಇಂದು ಚನ್ನಪಟ್ಟಣದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನನ್ನ ಭಾಗ್ಯ. ಚನ್ನಪಟ್ಟಣದಲ್ಲಿ ಧ್ವಜ ಹಾರಿಸಲು ಜನಪ್ರತಿನಿಧಿ ಇಲ್ಲದ ಕಾರಣ, ನಿಮ್ಮ ಮನೆ ಮಗನಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆ ಇಲ್ಲ ಎಂದರು.

Related