ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ: ಡಿಸಿಎಂ

ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ: ಡಿಸಿಎಂ

ಬೆಂಗಳೂರು: ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.

“ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ.  ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ.

ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ.

ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

 

Related