ಬೆಂಗಳೂರು: ಕಳೆದ ಬಾರಿ ಲೋಕಸಭಾ ಚುನಾವಣೆಯಂತೆ ಈ ಬಾರಿಯೂ ಕೂಡ ಮಂಡ್ಯ ಕ್ಷೇತ್ರವು ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿದೆ.
ಈಗಾಗಲೇ ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ಗೆ ಟಿಕೆಟ್ ಕೊಡುವುದಾಗಿ ಖಚಿತವಾಗಿದೆ ಆದರೆ ಅಧಿಕೃತವಾಗಿ ಘೋಷಣೆ ಮಾಡುವುದು ಒಂದೇ ಬಾಕಿ ಇದ್ದು ಮೈತ್ರಿಯಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಎಂದು ಕುತೂಹಲ ಕೆರಳಿಸಿದೆ.
ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರವನ್ನು ಬಿಟ್ಟು ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಹಾಗಾದರೆ ಈ ಬಾರಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಇರುತ್ತಾರೆ ಅಥವಾ ಸುಮಲತಾ ಅವರೇ ಕಳೆದ ಬಾರಿಯಂತೆ ಈ ಬಾರಿವು ಕೂಡ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲಕ್ಕೆ ಇದೆ 25ನೇ ತಾರೀಕು ತೆರೆ ಬೀಳಲಿದೆ ಎಂದು ತಿಳಿದುಬಂದಿದೆ.
ಹೌದು, ಮಂಡ್ಯ ಲೋಕಸಭಾ ಕ್ಷೇತ್ರ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಈ ಕ್ಷೇತ್ರದ ಮೇಲೆ ಬಿಜೆಪಿ ಅಭ್ಯರ್ಥಿಯಾಗುವ ನಿಟ್ಟಿನಲ್ಲಿ ಕಣ್ಣಿಟ್ಟಿರುವ ಹಾಲಿ ಸಂಸದೆ ಸುಮಲತಾ ಅಂಬರೀಶ್ಗೆ ಈಗ ಭಾರಿ ನಿರಾಸೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ಗೆ ಎಂದು ಬಿಜೆಪಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೆ ಎಚ್ಚೆತ್ತ ಸುಮಲತಾ ಮಂಡ್ಯದಲ್ಲಿ ಸೋಮವಾರ (ಮಾ. 25) ಮುಖಂಡರ ಸಭೆ ಕರೆದಿದ್ದಾರೆ.
ಕಳೆದ ಬಾರಿಯೇ ಮಂಡ್ಯದಂತಹ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ನಿಂತು ಗೆದ್ದು ತೋರಿಸಿದ್ದ ಸುಮಲತಾ ಅವರು ಈ ಬಾರಿ ರೆಬೆಲ್ ಆಗುತ್ತಾರಾ? ಜೆಡಿಎಸ್ಗೆ ಟ್ರಬಲ್ ಕೊಡುತ್ತಾರಾ? ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಯಾವುದಕ್ಕೂ ಈ ಬಗ್ಗೆ ಸೋಮವಾರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.
ಸಭೆಯಲ್ಲಿ ಆಪ್ತರೊಂದಿಗೆ ಚರ್ಚೆ ಮಾಡಿದ ನಂತರ ಮುಂದಿನ ನಿರ್ಧಾರದ ಬಗ್ಗೆ ಘೋಷಣೆ ಮಾಡಲಿದ್ದಾರೆ. ಇಲ್ಲಿ ಮೈತ್ರಿಗೆ ಸಪೋರ್ಟ್ ಮಾಡಬೇಕಾ? ಇಲ್ಲವೇ ಪಕ್ಷೇತರ ಅಭ್ಯರ್ಥಿಯಾಗಿಯೇ ಕಣಕ್ಕೆ ಇಳಿಯಬೇಕಾ ಎಂಬುದನ್ನು ಸುಮಲತಾ ಅಂಬರೀಷ್ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.