ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಸಿಗುತ್ತೆ ಎಂದು ಎಲ್ಲಾ ಬಿಜೆಪಿ ನಾಯಕರುಗಳು ಬಹು ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು ಇದರ ಮಧ್ಯ ಬಿಜೆಪಿಯ ಸಂಸದ ಶೋಭಾ ಕರಂದ್ಲಾಜೆ ಅವರು ಉಡುಪಿ ಮತ್ತು ಚಿಕ್ಕಮಂಗಳೂರಿನ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆಂದು ತಿಳಿದುಬಂದಿದೆ.
ಕಳೆದ ಕೆಲ ದಿನಗಳಿಂದ ದತ್ತ ಜಯಂತಿ ಉತ್ಸವಕ್ಕೆ ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿರುವ ಕರಂದ್ಲಾಜೆ ಅವರು ಅಷ್ಟಾಗಿ ಒಲವು ತೋರಿರಲಿಲ್ಲ. ಆಧರೆ, ಶೋಭಾ ಯಾತ್ರೆಯ ವೇಳೆ ಭಾಗಿಯಾಗಿ ಉಡುಪಿ-ಚಿಕ್ಕಮಗಳೂರಿನಿಂದ ಮತ್ತೆ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ.
ಶೋಭಾ ಯಾತ್ರೆ ವೇಳೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರದ ಅನುದಾನದಿಂದ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಕಾರ್ಯಗಳ ಮೇಲೆ ಮತಯಾಚನೆ ಮಾಡುವಂತೆ ಹೇಳಿದ್ದಾರೆ. ಇದಕ್ಕಾಗಿ ಭಾರತ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದ ಹಣ ತಂದಿದ್ದೇನೆ.
ನನ್ನ ಪ್ರಯತ್ನದ ಫಲವಾಗಿ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎರಡು ಕೇಂದ್ರೀಯ ವಿದ್ಯಾಲಯ ಶಾಲೆಗಳನ್ನು ಸ್ಥಾಪಿಸಲಾಯಿತು. ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಕಾಲೇಜುಗಳಿಗೆ ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಜಿಲ್ಲೆಯಲ್ಲಿ ರಸ್ತೆ, ರೈಲ್ವೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.