ಬೆಳಗಾವಿ: ಪ್ರೀತಿಯ ವಿಷಯವನ್ನು ಮುಂದಿಟ್ಟುಕೊಂಡು ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಕಟ್ಟಿಹಾಕಿ ಹಲ್ಲೆ ಮಾಡಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಆರೋಪಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಎರಡನೇ ವಾರದ ಕಾರ್ಯಕಲಾಪಗಳಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸರ್ಕಾರವೇ ಬೆಳಗಾವಿಯಲ್ಲಿದ್ದರೂ ನಗರದಿಂದ ಕೆಲವೇ ಕಿಮೀಗಳಷ್ಟು ದೂರ ಅಮಾನವೀಯ ಘಟನೆಯೊಂದು ನಡೆದಿದೆ. ಸರ್ಕಾರ ಕೇವಲ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತ ಆಗಿರುವುದಿಲ್ಲ, ಇಡೀ ರಾಜ್ಯದಲ್ಲಿ ಅದು ಕೆಲಸ ಮಾಡುತ್ತಿರುತ್ತದೆ ಎಂದು ಹೇಳಿದರು.
ವಂಟಮೂರಿಯಲ್ಲಿ ನಡೆದ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡೋದಿಲ್ಲ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಅಧಿವೇಶನ ಮುಗಿದ ಬಳಿಕ ಸಮಾಜದ ಮುಖಂಡರು ಮತ್ತು ಸ್ವಾಮೀಜಿಗಳ ಜೊತೆ ಚರ್ಚೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು.