ಬೆಂಗಳೂರು: ಕೇಂದ್ರ ಸರ್ಕಾರ ಸತತವಾಗಿ ಗ್ಯಾಸ್, ಡೀಸೆಲ್, ಪೆಟ್ರೋಲ್, ಗೋಧಿ, ಅಕ್ಕಿ ಹಾಗೂ ಇನ್ನಿತರ ದವಸಧಾನ್ಯಗಳು ಸೇರಿದಂತೆ ಎಲ್ಲವನ್ನು ಗಗನಕೇರಿಸಿ ಜನರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು (ಗುರುವಾರ ಏ. 17) ರಂದು ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ. ಸುಳ್ಳೇ ಬಿಜೆಪಿಯ ಮನೆ ದೇವರು. RSS ಸುಳ್ಳಿನ ಮಹಾ ಕಾರ್ಖಾನೆ ಎಂದರು. ಇದನ್ನೂ ಓದಿ: ಐಕಾನಿಕ್ ಸಿಟಿ ದುಬೈನಲ್ಲಿ ಗ್ಲೋಬಲ್ ಐಕಾನ್ ಮೀಡಿಯಾ ಪ್ರಶಸ್ತಿ ಪ್ರದಾನ
ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ ಎಂದರು.
ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?. ಹಾಲಿನ ಬೆಲೆ 4 ರೂ ಹೆಚ್ಚಳ ಮಾಡಿರುವುದು ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಎಂದು ಪ್ರಶ್ನಿಸಿದರು.